ಬೆಂಗಳೂರು: ಜೆಡಿಎಸ್ ಅಸ್ತಿತ್ವದಲ್ಲಿದೆ ಎಂಬುದನ್ನು ತೋರಿಸಲು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ನಿರಂತರವಾಗಿ ಕಾಂಗ್ರೆಸ್ ನಾಯಕರ ವಿರುದ್ಧ ಆರೋಪ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಆರೋಪಿಸಿದರು.
ಕೆಪಿಸಿಸಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2024ರಿಂದ ಆಗಸ್ಟ್ 2026ರವರೆಗೆ ಕುಮಾರಸ್ವಾಮಿ ಅವರು 148 ಪತ್ರಿಕಾಗೋಷ್ಠಿಗಳನ್ನು ನಡೆಸಿದ್ದಾರೆ. 2028ರ ವಿಧಾನಸಭಾ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ಬಿಜೆಪಿ ನಾಯಕರನ್ನು ತುಳಿಯುವ ಕೆಲಸ ಮಾಡುತ್ತಿದ್ದಾರೆ ಎಂದು ಟೀಕಿಸಿದರು.
ಹಿಂದೆ ಸಿದ್ದರಾಮಯ್ಯ ಅವರ ವಿರುದ್ಧ ಕುಮಾರಸ್ವಾಮಿ ಮಾತನಾಡುತ್ತಿದ್ದರೂ, ಸಿದ್ದರಾಮಯ್ಯ ಅವರು ಯಾವುದೇ ಪ್ರತಿಕ್ರಿಯೆ ನೀಡುತ್ತಿರಲಿಲ್ಲ. ಇದೀಗ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗಿರುವುದನ್ನು ಕುಮಾರಸ್ವಾಮಿಗೆ ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಈಗ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಆರೋಪ ಮಾಡುತ್ತಿದ್ದಾರೆ ಎಂದು ಲಕ್ಷ್ಮಣ್ ಹೇಳಿದರು.
ಕೆಪಿಎಸ್ಸಿ ನೇಮಕಾತಿ ಅಕ್ರಮದಲ್ಲಿ ತಮ್ಮ ಪಾತ್ರ ಸಾಬೀತಾದರೆ ತಾವು ಹಾಗೂ ತಮ್ಮ ಕುಟುಂಬ ರಾಜಕೀಯ ನಿವೃತ್ತಿ ಪಡೆಯುವುದಾಗಿ ಪ್ರಿಯಾಂಕ್ ಖರ್ಗೆ ಈಗಾಗಲೇ ಹೇಳಿದ್ದಾರೆ. ಇದಕ್ಕೆ ಕುಮಾರಸ್ವಾಮಿ ಸಿದ್ಧರಿದ್ದಾರೆಯೇ ಎಂದು ಲಕ್ಷ್ಮಣ್ ಪ್ರಶ್ನಿಸಿದರು.

24 ಎಇಇ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದ್ದು ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ. ಆಗಿನ ಕೆಪಿಎಸ್ಸಿ ಅಧ್ಯಕ್ಷರು ಮತ್ತು ಸದಸ್ಯರೇ ನೇಮಕಾತಿ ನಡೆಸಿದ್ದಾರೆ. ಶಿವಶಂಕರಪ್ಪ ಸಾಹುಕಾರ್ ಅವರನ್ನು ಯಡಿಯೂರಪ್ಪ ಅವರ ಅವಧಿಯಲ್ಲಿ ನೇಮಕ ಮಾಡಲಾಗಿತ್ತು ಎಂದು ಅವರು ಆರೋಪಿಸಿದರು.
ನೇಮಕಾತಿ ಅಕ್ರಮದ ಆರೋಪಕ್ಕೆ ಸಂಬಂಧಿಸಿದ ಬಸವರಾಜ ಕನ್ನಾಳೆ ಅವರು ಬಿಜೆಪಿ ನಾಯಕರೊಂದಿಗೆ ಆತ್ಮೀಯವಾಗಿರುವ ಹಲವು ಛಾಯಾಚಿತ್ರಗಳಿವೆ. ಅವರನ್ನು ತುಮಕೂರು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರನ್ನಾಗಿ ನೇಮಕ ಮಾಡಿದ್ದು ಯಾರು ಎಂಬುದನ್ನು ಬಿಜೆಪಿ ನಾಯಕರು ಸ್ಪಷ್ಟಪಡಿಸಬೇಕು ಎಂದು ಲಕ್ಷ್ಮಣ್ ಒತ್ತಾಯಿಸಿದರು.
ಈ ಪ್ರಕರಣದ ತನಿಖೆ ಸಿಐಡಿಗೆ ವಹಿಸಲಾಗಿದ್ದು, ತನಿಖೆ ಪೂರ್ಣಗೊಂಡ ಬಳಿಕ ಎಲ್ಲ ಸತ್ಯಗಳು ಹೊರಬರಲಿವೆ ಎಂದರು.
ಕುಮಾರಸ್ವಾಮಿ ಅವರು ಪೆನ್ಡ್ರೈವ್ ಬಿಡುಗಡೆ ಮಾಡುವುದಾಗಿ ಹೇಳಿ ಇದುವರೆಗೆ ಬಿಡುಗಡೆ ಮಾಡಿಲ್ಲ. ತಮ್ಮ ಬಳಿ ಕೂಡ ಪೆನ್ಡ್ರೈವ್ ಇದೆ ಎಂದು ಹೇಳಿದ ಲಕ್ಷ್ಮಣ್, ದಾಖಲೆಗಳಿದ್ದರೆ ಅವುಗಳನ್ನು ಬಿಡುಗಡೆ ಮಾಡಲು 10 ದಿನಗಳ ಕಾಲಾವಕಾಶ ಏಕೆ ಬೇಕು ಎಂದು ಪ್ರಶ್ನಿಸಿದರು.
ಪರೀಕ್ಷಾ ಅಕ್ರಮ ನಡೆದದ್ದು ಬಿಜೆಪಿ ಸರ್ಕಾರದ ಅವಧಿಯಲ್ಲಿ. ಈ ಕುರಿತು ಸಮಿತಿಗಳು ರಚನೆಯಾಗಿದ್ದು, ಐದು ಸದಸ್ಯರ ಸಮಿತಿ 2026ರ ಜನವರಿಯಲ್ಲಿ ವರದಿ ನೀಡಿದೆ. ನ್ಯಾಯಾಲಯವೂ ಆಯ್ಕೆಯಾದ ಅಭ್ಯರ್ಥಿಗಳು ತಪ್ಪಿತಸ್ಥರು ಎಂದು ಹೇಳಿಲ್ಲ; ತನಿಖೆ ಪೂರ್ಣಗೊಳ್ಳುವವರೆಗೆ ಅವರು ಹುದ್ದೆಯಲ್ಲಿ ಮುಂದುವರಿಯಬಹುದು ಎಂದು ಸೂಚಿಸಿದೆ ಎಂದು ಅವರು ಹೇಳಿದರು.
ಚುನಾವಣಾ ಆಯೋಗದ ವಿರುದ್ಧವೂ ವಾಗ್ದಾಳಿ ನಡೆಸಿದ ಲಕ್ಷ್ಮಣ್, ಕರ್ನಾಟಕದಲ್ಲಿ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ಮತದಾರರನ್ನು ತೆಗೆದುಹಾಕಲಾಗಿದೆ ಎಂದು ಆರೋಪಿಸಿದರು. 16 ಲಕ್ಷ ಮತದಾರರು ಗೈರಾಗಿದ್ದು, 66 ಲಕ್ಷ ಮಂದಿ ಬೇರೆಡೆಗೆ ಸ್ಥಳಾಂತರಗೊಂಡಿದ್ದಾರೆ ಎಂದು ಹೇಳಿದ ಅವರು, ಚುನಾವಣಾ ಆಯೋಗ ಬಿಜೆಪಿ ಏಜೆಂಟ್ನಂತೆ ವರ್ತಿಸುತ್ತಿದೆ ಎಂದು ಆರೋಪಿಸಿದರು.
